ಚಿಕ್ಕಮಗಳೂರು :(ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಚಂದ್ರದ್ರೋಣ ಪರ್ವತದ ದತ್ತ ಪೀಠದಲ್ಲಿ ಡಿಸೆಂಬರ್ 19 ರಂದು ನಡೆಯುವ ದತ್ತ ಜಯಂತಿ ಹಿನ್ನೆಲೆ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ.
ದತ್ತ ಜಯಂತಿಯ ಅಂಗವಾಗಿ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ,ಕೊಪ್ಪ, ನರಸಿಂಹರಾಜಪುರ, ಬಾಳೆಹೊನ್ನೂರು, ಆಲ್ದೂರು, ಮೂಡಿಗೆರೆ, ಪಟ್ಟಣಗಳಲ್ಲಿ ದತ್ತ ಮಾಲಾಧಾರಿಗಳಿಂದ ಶೋಭಾಯಾತ್ರೆ ನಡೆಯುವ ಕಾರಣಕ್ಕೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸುವ ಸಲುವಾಗಿ ಜಿಲ್ಲೆಯಾದ್ಯಂತ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ.
ಶೃಂಗೇರಿ, ಕೊಪ್ಪ, ನರಸಿಂಹರಾಜಪುರ ತಾಲೂಕುಗಳಲ್ಲಿ ಡಿಸೆಂಬರ್ 15 ರ ಬೆಳಗ್ಗೆಯಿಂದ 17ರ ಮಧ್ಯರಾತ್ರಿಯ ವರೆಗೆ ಮಧ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಮೂಡಿಗೆರೆ ತಾಲ್ಲೂಕಿನಲ್ಲಿ ಡಿ.16 ರ ಬೆಳಗ್ಗೆಯಿಂದ ಡಿಸೆಂಬರ್ 17 ರ ಮಧ್ಯರಾತ್ರಿ 12ರ ವರೆಗೆ ಮದ್ಯ ಮಾರಾಟವನ್ನು ನಿರ್ಬಂಧಿಸಲಾಗಿದೆ. ಹಾಗೂ ಚಿಕ್ಕಮಗಳೂರು ತಾಲೂಕಿನಲ್ಲಿ ಡಿ. 17ರ ಬೆಳಗ್ಗೆಯಿಂದ ಡಿ.19 ರ ಮಧ್ಯರಾತ್ರಿ 12 ಗಂಟೆಯ ವರೆಗೆ ಮದ್ಯಮಾರಾಟವನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎನ್ ರಮೇಶ್ ಅವರು ತಿಳಿಸಿದ್ದಾರೆ.
ಒಂದು ವೇಳೆ ಮದ್ಯಸಾಗಾಟ ಹಾಗೂ ತಯಾರಿಕೆಯಲ್ಲಿ ಯಾರಾದರೂ ಭಾಗಿಯಾದಲ್ಲಿ ಕಾನೂನು ರೀತಿಯ ಸೂಕ್ತ ಕ್ರಮಗಳನ್ನು ಕೈಗೊಳ್ಳುವುದಾಗಿ ಜಿಲ್ಲಾಡಳಿತ ತಿಳಿಸಿದೆ.

0 Comments