ಶಿವಮೊಗ್ಗ : (ನ್ಯೂಸ್ ಮಲ್ನಾಡ್ ವರದಿ) ಹಿಂದೂ ಸಂಘಟನೆಗಳಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದ ಹರ್ಷ ಎಂಬ ಯುವಕನನ್ನು ನಿನ್ನೆ ತಡರಾತ್ರಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ನಡೆಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಸೀಗೆಹಟ್ಟಿ ನಿವಾಸಿ ಹರ್ಷ ಎಂಬ 24 ವರ್ಷದ ಯುವಕನ ಮೇಲೆ ನಾಲ್ವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಗಂಭೀರವಾಗಿ ಹಲ್ಲೆನಡೆಸಿ ಆತನನ್ನು ಕೊಲೆ ಗೈದಿದ್ದಾರೆ. ತಕ್ಷಣ ಆತನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾದರೂ ಕೂಡ ಗಂಭೀರವಾಗಿ ಗಾಯಗೊಂಡಿದ್ದ ಹರ್ಷ ಮೃತಪಟ್ಟಿದ್ದಾರೆ.

ಇದನ್ನೂ ಓದಿ : ಚಿಕ್ಕಮಗಳೂರಿನಲ್ಲಿ ಅಕ್ರಮ ಗೋಮಾಂಸ ದಂಧೆ; ಅಸ್ಸಾಂ ಕಾರ್ಮಿಕನ ಬಂಧನ ಸುಮಾರು 40 ಕೆ.ಜಿ ಗೋಮಾಂಸ ವಶ

ಘಟನೆ ನಡೆಯುತ್ತಿದ್ದಂತೆ ಶಿವಮೊಗ್ಗದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು ಅಲ್ಲಲ್ಲಿ ಕಲ್ಲು ತೂರಾಟ ನಡೆದಿದೆ. ಪೊಲೀಸರು ವಾತಾವರಣವನ್ನು ನಿಯಂತ್ರಿಸುವ ಸಲುವಾಗಿ ಲಾಠಿ ಚಾರ್ಜ್ ಕೂಡ ನಡೆಸಿದ್ದಾರೆ.

ಹಿರಿಯ ಪೊಲೀಸ್ ಅಧಿಕಾರಿಗಳು, ಗೃಹ ಸಚಿವ ಆರಗಜ್ಞಾನೇಂದ್ರ, ರಾಜಕೀಯ ನಾಯಕರುಗಳು ಸ್ಥಳದಲ್ಲಿ ಬೀಡುಬಿಟ್ಟಿದ್ದಾರೆ. ಯಾವುದೇ ಅಹಿತಕರ ಘಟನೆಗಳು ಜಿಲ್ಲೆಯಲ್ಲಿ ನಡೆಯದಂತೆ ತಡೆಗಟ್ಟುವ ಸಲುವಾಗಿ ಶಿವಮೊಗ್ಗ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಣೆಮಾಡಿದೆ. ಶಿವಮೊಗ್ಗದಲ್ಲಿ 144 ಸೆಕ್ಷನ್ ಜಾರಿಮಾಡಿದ್ದು ಸದ್ಯ ಬೂದಿ ಮುಚ್ಚಿದ ಕೆಂಡದಂತಿದೆ.

ಪರಿಸ್ಥಿತಿ ಅತ್ಯಂತ ಕಠಿಣವಾಗಿರುವ ಕಾರಣ ಯಾರು ಕೂಡ ಸಂಯಮ ಕಳೆದುಕೊಳ್ಳಬಾರದು ಜನರು ಅತ್ಯಂತ ಹೆಚ್ಚಿನ ತಾಳ್ಮೆಯಿಂದ ಇರಬೇಕೆಂದು ಗೃಹಸಚಿವ ಆರಗಜ್ಞಾನೇಂದ್ರ ಮನವಿ ಮಾಡಿದ್ದಾರೆ.