ಜಯಪುರ : (ನ್ಯೂಸ್ ಮಲ್ನಾಡ್ ವರದಿ) ಹೆಜ್ಜೇನು ದಾಳಿಗೆ ರೈತರೋರ್ವರು ದಾರುಣವಾಗಿ ಸಾವನ್ನಪ್ಪಿರುವ ದುರ್ಘಟನೆ ಸಂಭವಿಸಿದೆ.


ಚಿಕ್ಕಮಗಳೂರು ಜಿಲ್ಲೆಯ ಮೇಗುಂದಾ ಹೋಬಳಿ ವ್ಯಾಪ್ತಿಯ ಅತ್ತಿಕುಡಿಗೆ ಗ್ರಾಮ ಪಂಚಾಯತ್ ನ ಕಲ್ಲುಗುಡ್ಡೆಯಲ್ಲಿ ಈ ಘಟನೆ ನಡೆದಿದ್ದು, ಕಲ್ಲುಗುಡ್ಡೆ ಗ್ರಾಮದ ಬೊಮ್ಮನಹಳ್ಳಿಯ ಅಶೋಕ್ (45)  ಹೆಜ್ಜೇನು ದಾಳಿಗೆ ಮೃತಪಟ್ಟ ದುರ್ದೈವಿ. 

ಮೃತ ಅಶೋಕ್ ಅವರು ಭಾನುವಾರ ತಮ್ಮ ಜಮೀನಿನಲ್ಲಿ ಕೆಲಸ ಮಾಡುವಾಗ ಇದ್ದಕ್ಕಿದಂತೆಯೇ ಹೆಜ್ಜೇನುಗಳು ದಾಳಿ ನಡೆಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ತೀವ್ರವಾಗಿ ಜೇನು ಹುಳುಗಳು  ದಾಳಿ ನಡೆಸಿದ ಪರಿಣಾಮ ಅಸ್ವಸ್ಥಗೊಂಡಿದ್ದ ಅಶೋಕ್ ಅವರನ್ನು ಜಯಪುರ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಕೊಪ್ಪದ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗಮಧ್ಯೆ ಅಶೋಕ್ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ. 

ಮೃತರ ಸಾವಿನ ಕುರಿತು ಕುಟುಂಬಸ್ಥರು ಹಾಗೂ ಗ್ರಾಮಸ್ಥರು  ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಘಟನಾ ಸಂಬಂಧ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ: ಪ್ರಸನ್ನ ಕುಮಾರ್ ಕಿಬ್ಳಿ