ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ರಾಜ್ಯದಲ್ಲಿ ಗೋವುಗಳ ಸಂರಕ್ಷಣೆಗೆ ಒತ್ತು ನೀಡುವ ಸಲುವಾಗಿ ಹಾಗೂ ಗೋವುಗಳ ಉಳಿವಿಗಾಗಿ ಹೆಜ್ಜೆಯಿಟ್ಟಿರುವ ರಾಜ್ಯ ಸರ್ಕಾರ ಜುಲೈ ತಿಂಗಳಿನಲ್ಲಿ ಐದು ಗೋಶಾಲೆಗಳನ್ನು ಲೋಕಾರ್ಪಣೆ ಮಾಡಲಿದೆ. 


ನಿರ್ಮಾಣ ಮಾಡಿರುವ ಈ  ಗೋಶಾಲೆಗಳಲ್ಲಿ ಕೊಳವೆ ಬಾವಿಗಳನ್ನು ಕೊರೆದು ನೀರಿನ ಸೌಲಭ್ಯ ಕಲ್ಪಿಸಲಾಗುತ್ತಿದೆ, ಕೊಟ್ಟಿಗೆಗಳನ್ನು ನಿರ್ಮಾಣ ಮಾಡಲಾಗಿದೆ. ಗೋವುಗಳ ಆರೋಗ್ಯದ ಮೇಲೆ ನಿಗಾವಹಿಸಲು ಪಶುವೈದ್ಯಾಧಿಕಾರಿಗಳನ್ನು ನಿಯೋಜಿಸಲಾಗಿದೆ.  ಪ್ರತಿಯೊಂದು ಗೋಶಾಲೆ ಪ್ರಾರಂಭ ಮತ್ತು ನಿರ್ವಹಣೆಗೆ 50 ಲಕ್ಷ ರೂ. ಗಳನ್ನು ಸರ್ಕಾರ ನಿಗದಿಪಡಿಸಿದೆ. ಪ್ರತಿಯೊಂದು ಗೋಶಾಲೆಗಳಲ್ಲಿ 100 ರಿಂದ 150 ಗೋವುಗಳ ಪೋಷಣೆಗೆ ಅಗತ್ಯವಿರುವಂತೆ ಮೂಲಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಪ್ರಾಥಮಿಕ ಹಂತದಲ್ಲಿ ಜುಲೈ ತಿಂಗಳಿನಲ್ಲಿ ಚಿಕ್ಕಮಗಳೂರು, ವಿಜಯಪುರ, ಹಾವೇರಿ, ಮೈಸೂರು ಹಾಗೂ ತುಮಕೂರು ಜಿಲ್ಲೆಗಳಲ್ಲಿ ಗೋಶಾಲೆಯನ್ನು ಲೋಕಾರ್ಪಣೆ ಮಾಡುವ ಸಲುವಾಗಿ ಸಿದ್ಧತೆಗಳು ಆರಂಭವಾಗಿದೆ. 

ಗೋಹತ್ಯಾ ನಿಷೇಧ ಕಾಯ್ದೆಯನ್ನು ಬಿಜೆಪಿ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಅನುಷ್ಟಾನಕ್ಕೆ ತಂದು ಒಂದೆಡೆಯಿಂದ ಗೋವುಗಳ ಉಳಿವಿಗಾಗಿ ಒಂದು ಹೆಜ್ಜೆ ಇಟ್ಟಿದ್ದರೆ, ಇನ್ನೊಂದೆಡೆ ಅವುಗಳ ಮೇವು ಹಾಗೂ ಸುರಕ್ಷತೆಯ ಸಲುವಾಗಿ ಗೋಶಾಲೆಗಳ ನಿರ್ಮಾಣ ಮಾಡುತ್ತಿದೆ.