ಶಿವಮೊಗ್ಗ : (ನ್ಯೂಸ್ ಮಲ್ನಾಡ್ ವರದಿ ) ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ರೌಡಿ ಕಾಲಿಗೆ ಪೊಲೀಸರು ಗುಂಡುಹಾರಿಸಿ ಬಂಧಿಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. 


ಶಿವಮೊಗ್ಗದ ಬುದ್ಧನಗರದ ರೌಡಿ ಅರ್ಷದ್ ಖಾನ್ (24) ಎಂಬಾತನ ಮೇಲೆ ಪೊಲೀಸರು ಗುಂಡು ಹಾರಿಸಿ ಆತನನ್ನು ಸೆರೆ ಹಿಡಿದಿದ್ದಾರೆ. ಸುಲಿಗೆ, ಡಕಾಯಿತಿ ಪ್ರಕರಣದಲ್ಲಿ ಪೊಲೀಸರಿಗೆ ಬೇಕಾಗಿದ್ದ ಆರೋಪಿ ಅರ್ಷದ್ ಖಾನ್ ಎಂಬಾತ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದು ಹೊರಬಂದಿದ್ದ.

ಇಂದು ಮುಂಜಾನೆ 8.30 ರಿಂದ 9 ಗಂಟೆ ಸಮಯದಲ್ಲಿ ಅರ್ಷದ್ ಖಾನ್ ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾಗಿದ್ದಾನೆ. ಈ ಸಂದರ್ಭದಲ್ಲಿ ತುಂಗಾನಗರ ಠಾಣೆಯ ಇನ್ಸ್​ಪೆಕ್ಟರ್​ ಆತನ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.

ಶಿವಮೊಗ್ಗದ ಹೊರವಲಯವಾದ ಅನುಪಿನಕಟ್ಟೆ ಬಳಿ ಗುಂಡಿನ ದಾಳಿ ನಡೆಸಲಾಗಿದ್ದು, ಪೊಲೀಸರ ಗುಂಡೇಟಿಗೆ ಒಳಗಾದ ಆರೋಪಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.