ಶಿವಮೊಗ್ಗ : (ನ್ಯೂಸ್ ಮಲ್ನಾಡ್ ವರದಿ)  ಫೆಬ್ರವರಿ ತಿಂಗಳಿನಲ್ಲಿ ಇಡೀ ರಾಜ್ಯವೇ ಬೆಚ್ಚಿ ಬೀಳುವಂತೆ ನಡು ರಸ್ತೆಯಲ್ಲಿ ಹತ್ಯೆಗೀಡಾಗಿದ್ದ ಬಜರಂಗದಳದ ಕಾರ್ಯಕರ್ತ ಹರ್ಷನ ಹತ್ಯೆಯನ್ನು ಖಂಡಿಸಿ ಹಾಗೂ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂದು ಆಗ್ರಹಿಸಿ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳು ಹಾಗೂ ಬಂದ್ ನಡೆದಿತ್ತು. 

ಇದನ್ನೂ ಓದಿ : ಕಾಫಿ ತೋಟದಲ್ಲಿ ಮೃತಪಟ್ಟ ಹೆಣ್ಣಾನೆ

ಹರ್ಷನ ಹತ್ಯೆಗೆ ಸಂಬಂಧಿಸಿದಂತೆ ತನಿಖೆಯ ಜವಾಬ್ದಾರಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ಸರ್ಕಾರ ವಹಿಸಿತ್ತು. ಈ ನಿಟ್ಟಿನಲ್ಲಿ ಇಂದು NIA ಅಧಿಕಾರಿಗಳ ತಂಡ ಶಿವಮೊಗ್ಗದಲ್ಲಿ ದಾಳಿ ನಡೆಸಿ ಪರಿಶೀಲನೆ ಆರಂಭಿಸಿದೆ. ಹರ್ಷನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳ ತಂಡ ಶಿವಮೊಗ್ಗಕ್ಕೆ ಆಗಮಿಸಿದ್ದು, ಇಂದು ಬೆಳ್ಳಂ ಬೆಳಗ್ಗೆಯೇ ವಿವಿಧೆಡೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.


ಮಾಹಿತಿಯ ಪ್ರಕಾರ ಒಟ್ಟು 8 ವಾಹನಗಳಲ್ಲಿ 30 ರಾಷ್ಟ್ರೀಯ ತನಿಖಾದಳದ  ಅಧಿಕಾರಿಗಳ ತಂಡ ಶಿವಮೊಗ್ಗಕ್ಕೆ ಆಗಮಿಸಿದ್ದು, ಹರ್ಷ ಕೊಲೆ ಪ್ರಕರಣದ ಆರೋಪಿಗಳ ಮನೆ ಸೇರಿದಂತೆ ಮುಂಜಾನೆಯಿಂದ ನಗರದ 18 ಸ್ಥಳಗಳಲ್ಲಿ ದಾಳಿ ಮಾಡಿರುವ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಶಿವಮೊಗ್ಗಕ್ಕೆ ಆಗಮಿಸಿರುವ ತಂಡದಲ್ಲಿ ಕೇರಳ, ಆಂಧ್ರ ಪ್ರದೇಶದ ಅಧಿಕಾರಿಗಳಿದ್ದಾರೆ ಎನ್ನಲಾಗಿದ್ದು ಘಟನೆಗೆ ಸಂಬಂಧಿಸಿದಂತೆ ವಿವಿಧ ಕಡೆಗಳಲ್ಲಿ  ಅಧಿಕಾರಿಗಳು ದಾಳಿ ನಡೆಸಿ ಮಾಹಿತಿ ಕಲೆಹಾಕಿದ್ದಾರೆ. 

ಇಂದು ಬೆಳಗ್ಗೆ ಐದು ಗಂಟೆಯಿಂದ ಅಧಿಕಾರಿಗಳು ದಾಳಿ ಆರಂಭಿಸಿದ್ದು,  ಶಿವಮೊಗ್ಗ ಜಿಲ್ಲೆಯಲ್ಲಿ 13 ಕಡೆಗಳಲ್ಲಿ ವಿಚಾರಣೆ ನಡೆಸಲಾಗಿದೆ. ಬೆಳಿಗ್ಗೆ 10 ಗಂಟೆಯೊಳಗೆ ವಿಚಾರಣೆ ಮುಗಿಸಿ ವಾಪಸ್‌ ತೆರಳಿದ್ದಾರೆ. ಹರ್ಷ ಕೊಲೆ ಪ್ರಕರಣದಲ್ಲಿ ಹೆಸರು ಕೇಳಿ ಬಂದ ಆರೋಪಿಗಳು ಹಾಗೂ ಅವರ ಸಂಬಂಧಿಕರ ವಿಚಾರಣೆ ನಡೆಸಿದ್ದಾರೆ. ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟಾರೆ ಅಧಿಕಾರಿಗಳು ಸುಮಾರು 450 ಮಂದಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂಬ ಮಾಹಿತಿ ದೊರೆತಿದೆ.