ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಮಲೆನಾಡಿಗರು ಎದುರಿಸುತ್ತಿರುವ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ, ಪ್ರಮುಖವಾಗಿ ಕೃಷಿ ಕ್ಷೇತ್ರದಲ್ಲಿ ಎದುರಾಗಿರುವ ವಿವಿಧ ಮಾರಕ ರೋಗ ಹಾಗೂ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿ ನಾಳೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಮಲೆನಾಡಿನ ಜನಪರ ಒಕ್ಕೂಟವು ಬೃಹತ್ ಪ್ರತಿಭಟನೆಯನ್ನು ಆಯೋಜಿಸಿದೆ. 

ಮಲೆನಾಡಿನ ಜನರಿಗೆ ಎದುರಾಗಿರುವ ಸಮಸ್ಯೆಗಳ ಕುರಿತು ಪರಿಹಾರ ದೊರಕಿಸುವ ಸಲುವಾಗಿ ಸರ್ಕಾರದ ಗಮನ ಸೆಳೆಯಲೆಂದು ಮಲೆನಾಡು ಜನಪರ ಒಕ್ಕೂಟವು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸೆಪ್ಟೆಂಬರ್ 20ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ.

ಇದನ್ನೂ ಓದಿ: ಹೆಚ್ಚಿನ ಬೆಲೆಗೆ ರೈತರಿಗೆ ರಸಗೊಬ್ಬರ ಮಾರಾಟ ನಡೆಸುತ್ತಿದ್ದ ಮಳಿಗೆ ಮೇಲೆ ಜಾಗೃತದಳದ ಅಧಿಕಾರಿಗಳ ದಾಳಿ

ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿಡಿ ರಾಜೇಗೌಡ ಅವರು ಕೂಡ ಈ ಹೋರಾಟಕ್ಕೆ ಬೆಂಬಲವನ್ನು ಸೂಚಿಸಿದ್ದು, ಮಲೆನಾಡಿಗರು ಈ ಹೋರಾಟಕ್ಕೆ ವ್ಯಾಪಕವಾಗಿ ಬೆಂಬಲಿಸುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಕೋರಿದ್ದಾರೆ.

ಈ ಬಾರಿ ಮಳೆಯಿಂದ ಎದುರಾಗಿರುವ ನಷ್ಟಕ್ಕೆ ಸೂಕ್ತವಾದ ಪರಿಹಾರವನ್ನು ಕ್ಷಿಪ್ರಗತಿಯಲ್ಲಿ ಒದಗಿಸಬೇಕು, ಪಶ್ಚಿಮಘಟ್ಟದ ತಪ್ಪಲಿನ ಪ್ರದೇಶವಾದ ಮಲೆನಾಡನ್ನು ವಿಶೇಷ ಕೃಷಿ ವಲಯವಾಗಿ ಘೋಷಿಸಬೇಕು. ಎಲೆಚುಕ್ಕಿ ರೋಗಕ್ಕೆ ಲಸಿಕೆ ಸಂಶೋಧಿಸಬೇಕು. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕನಿಷ್ಠ 10 ಎಕರೆ ಜಾಗವನ್ನು ಆಶ್ರಯ ನಿವೇಶನಕ್ಕೆ ಕಾಯ್ದಿರಿಸಬೇಕು. ಹಾಲಿನ ಘಟಕ ಸ್ಥಾಪಿಸಿ ಕೆಎಂಎಫ್ ಸಂಪರ್ಕ ಕಲ್ಪಿಸಬೇಕು. ಪರಿಸರ ಸೂಕ್ಷ್ಮ ವಲಯ, ಹುಲಿ ಯೋಜನೆ ಇತ್ಯಾದಿಗಳಿಂದ ಆಗುವ ತೊಂದರೆ ತಪ್ಪಿಸಬೇಕು. ಸೆಕ್ಷನ್ 4 ವಾಪಸ್ ಪಡೆಯಬೇಕು, ಏಪ್ರಿಲ್ 15ಅನ್ನು ಮಲೆನಾಡು ದಿನವನ್ನಾಗಿ ಆಚರಿಸಬೇಕು ಎನ್ನುವುದು ಸೇರಿ ಇನ್ನೂ ಪ್ರಮುಖ ಸಮಸ್ಯೆಗಳ ಕುರಿತು ಸರ್ಕಾರ ಸೂಕ್ತವಾದ ನಿರ್ಣಯಗಳನ್ನು ಕೈಗೊಳ್ಳಬೇಕೆಂಬ ಒತ್ತಾಯವನ್ನು ಸರ್ಕಾರಕ್ಕೆ ಮಾಡಲಾಗುತ್ತದೆ ಎಂಬುದಾಗಿ ಪದಾಧಿಕಾರಿಗಳು ತಿಳಿಸಿದ್ದಾರೆ. 

ಸಂಘಟನೆಗಳ ಬೆಂಬಲ, ಸಹಿ ಸಂಗ್ರಹ :

ಹೋರಾಟವನ್ನು ಮತ್ತಷ್ಟು ಬಲಯುಕ್ತವನ್ನಾಗಿಸುವ ನಿಟ್ಟಿನಲ್ಲಿ ಈಗಾಗಲೇ ಹೋರಾಟಕ್ಕೆ ರೈತಸಂಘ ಸೇರಿದಂತೆ ವಿವಿಧ ಸಂಘಟನೆಗಳು ಬೆಂಬಲ ನೀಡಿದ್ದು, ಮಲೆನಾಡು ಭಾಗದ ಅನೇಕ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಭೆಗಳನ್ನು ನಡೆಸಿ, ಮಲೆನಾಡಿನ ಜನರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳನ್ನು ಪಟ್ಟಿ ಮಾಡಿ, ಮನವಿ ಪತ್ರವನ್ನು ಸಿದ್ಧಪಡಿಸಲಾಗಿದೆ. ಅಲ್ಲದೆ ಸರ್ಕಾರಕ್ಕೆ ಸಲ್ಲಿಸಲಾಗುವ ಮನವಿ ಪತ್ರಕ್ಕೆ ಸಹಿ ಸಂಗ್ರಹ ಕೂಡ ನಡೆದಿದ್ದು ಅನೇಕ ಸಂಘಟನೆಗಳು ಪೂರಕವಾದ ಬೆಂಬಲವನ್ನು ಈ ಹೋರಾಟಕ್ಕೆ ಸೂಚಿಸಿದೆ. 

ನಾಳೆ (ಸೆ.20 ) ರ ಬೆಳಗ್ಗೆ 10 ಗಂಟೆಯಿಂದ ಸಂಜೆ 5.30ರ ವರೆಗೆ ನಡೆಯುವ ಈ ಪ್ರತಿಭಟನೆಯಲ್ಲಿ ಉದ್ಯೋಗದ ನಿಮಿತ್ತ ಬೆಂಗಳೂರಿನಲ್ಲಿರುವ ಮಲೆನಾಡಿನ ಮೂಲ ನಿವಾಸಿಗಳು, ಮಲೆನಾಡಿನ ಉನ್ನತಿಗಾಗಿ ಬಯಸುವ ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸಮಿತಿ ಮನವಿ ಮಾಡಿದೆ.


ಸಮಸ್ಯೆಗಳ ಪರಿಹಾರದ ಕುರಿತಾಗಿ ಸರ್ಕಾರ ತ್ವರಿತ ಗತಿಯಲ್ಲಿ ಮುಂದುವರೆಯದೆ ಇದ್ದಲ್ಲಿ ಮುಂದಿನ ದಿನಗಳಲ್ಲಿ ತೀವ್ರ ತರಹದ ಮುಷ್ಕರ ಹಾಗೂ ಮುಂದಿನ ಹೆಜ್ಜೆ ಇಡುವುದಾಗಿ ಸಮಿತಿ ಈಗಾಗಲೇ ಎಚ್ಚರಿಕೆಯನ್ನು ಸಹ ರವಾನಿಸಿದೆ. ಈ ಕುರಿತಾಗಿ ಮಲೆನಾಡಿನ ಜನಪರ ಒಕ್ಕೂಟದ ಪದಾಧಿಕಾರಿಗಳು ಸಾರ್ವಜನಿಕರಿಂದಲೂ ಬೆಂಬಲ ಪಡೆದಿದ್ದು ಸರ್ಕಾರದ ಸ್ಪಂದನೆಯ ಮೇಲೆ ಹೋರಾಟದ ಮುಂದಿನ ರೂಪುರೇಷೆಗಳನ್ನು ನಿರ್ಧರಿಸಲಿದೆ.