ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಎಟಿಎಂಗಳಲ್ಲಿ ಸಾರ್ವಜನಿಕರ ಗಮನ ಬೇರೆಡೆಗೆ ಸೆಳೆದು ಹಣ ಡ್ರಾ ಮಾಡಿ ನಯವಾಗಿ ವಂಚನೆ ಮಾಡುತ್ತಿದ್ದ ಅಂತರ್ ಜಿಲ್ಲಾ ವಂಚಕನನ್ನು ಪೊಲೀಸರು ಬಂಧಿಸಿ ಲಕ್ಷಾಂತರ ರೂಪಾಯಿ ಹಣ ಹಾಗೂ ವಿವಿಧ ಬ್ಯಾಂಕ್ ಗಳ ಎಟಿಎಂ ಕಾರ್ಡ್ ನ್ನು ವಶಕ್ಕೆ ಪಡೆದಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ಹುಡ್ಕೋ ಕಾಲೋನಿಯ ನಿವಾಸಿ ಎನ್.ಸಾಗರ್ ಬಿನ್ ಜೆ. ನಾರಾಯಣಮೂರ್ತಿ (29) ಬಂಧಿತ ಆರೋಪಿ. ಸಾರ್ವಜನಿಕರಿಂದ ಖಚಿತ ಮಾಹಿತಿ ಮೇರೆಗೆ ನಾಯನಹಳ್ಳಿ ಗ್ರಾಮದ ಕೆನರಾ ಬ್ಯಾಂಕ್ ಬಳಿ ಅನುಮಾನಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದಾಗ ಆರೋಪಿಯು ಶಿವಮೊಗ್ಗ, ಯಾದಗಿರಿ, ಕೆ.ಆರ್. ನಗರ ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯ ಎಟಿಎಂ ಕೇಂದ್ರಗಳ ಬಳಿ ಸಾರ್ವಜನಿಕರ ಗಮನವನ್ನು ಬೇರೆಕಡೆ ಸೆಳೆದು ಅವರ ಎಟಿಎಂ ಕಾರ್ಡ್ಗಳನ್ನು ಮೋಸದಿಂದ ಪಡೆದುಕೊಂಡು ಹಣ ಡ್ರಾ ಮಾಡಿಕೊಂಡಿರುವ ಪ್ರಕರಣಗಳು ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಯಲ್ಲಿರುತ್ತದೆ ಎಂಬ ಮಾಹಿತಿ ಒದಗಿದೆ.
ಇದನ್ನೂ ಓದಿ: ಪೆಟ್ರೋಲ್ ಬಾಂಬ್ ಹಾಕಿ ಹಿಂದೂಗಳ ಹತ್ಯೆಗೆ ಸಂಚು ರೂಪಿಸಿದ್ದ ನಗರಸಭಾ ಸದಸ್ಯ ಮತ್ತು ಆತನ ಸಹಚರನ ಬಂಧನ
ಇದಲ್ಲದೆ ಗೌರಿಬಿದನೂರು ನಗರ, ತುಮಕೂರು ಜಿಲ್ಲೆಯ ಗುಬ್ಬಿ, ಶಿರಾ ಹಾಗೂ ಐಜೂರು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಎಟಿಎಂ ಕೇಂದ್ರಗಳ ಬಳಿ ಸಾರ್ವಜನಿಕರಿಗೆ ಮೋಸ ಮಾಡಿರುವುದಾಗಿ ಆರೋಪಿ ತಪ್ಪು ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಯಿಂದ 1 ಲಕ್ಷ 45 ಸಾವಿರ ನಗದು ಹಾಗೂ ಕೆನರಾ ಬ್ಯಾಂಕ್, ಕರ್ನಾಟಕ ಗ್ರಾಮೀಣ ಬ್ಯಾಂಕ್, ಬ್ಯಾಂಕ್ ಆಫ್ ಬರೋಡ ಬ್ಯಾಂಕ್ಗಳ ಎಟಿಎಂ ಕಾರ್ಡ್ಗಳನ್ನು ವಶಪಡಿಸಲಾಗಿದೆ ಚಿಕ್ಕಬಳ್ಳಾಪುರ ಉಪವಿಭಾಗದ ಡಿವೈಎಸ್ಪಿ ವಿ.ಕೆ. ವಾಸುದೇವ್ ಹಾಗೂ ಸಿಪಿಐ ರಾಜು ಅವರ ಮಾರ್ಗದರ್ಶನದಲ್ಲಿ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಕೆ.ಪ್ರದೀಪ್ ಪೂಜಾರಿ ಅವರ ನೇತೃತ್ವದಲ್ಲಿ ಮತ್ತು ಸಿಬ್ಬಂದಿಯರಾದ ರಾಜೇಶ್, ರವಿಕುಮಾರ್, ವಿ.ಮುರಳಿ, ವಿಜಯಕುಮಾರ್ ಆರೋಪಿಯನ್ನು ಬಂಧಿಸಿದ್ದಾರೆ.
ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಧಿಕಾರಿ ಮತ್ತು ಸಿಬ್ಬಂದಿ ಆರೋಪಿಯನ್ನು ಬಂಧಿಸಿರುವುದಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ್ ಅವರು ಶ್ಲಾಘನೆ ಮಾಡಿದ್ದಾರೆ.









0 Comments