ಕಳಸ: (ನ್ಯೂಸ್ ಮಲ್ನಾಡ್ ವರದಿ) ಮಲೆನಾಡು ಭಾಗದ ಕೃಷಿಕರ ಅಡಿಕೆ ತೋಟಗಳಿಗೆ ಬಾಧಿಸುತ್ತಿರುವ ಎಲೆಚುಕ್ಕಿ ರೋಗದ ನಿಯಂತ್ರಣಕ್ಕಾಗಿ ಹೊರನಾಡಿನ ಅನ್ನಪೂರ್ಣೇಶ್ವರಿ ದೇವಿಯ ಸನ್ನಿಧಿಯಲ್ಲಿ ಕೃಷಿಕರ ಪರವಾಗಿ ಪೂಜೆ, ಪಾರಾಯಣ, ಹೋಮ ನಡೆಸಲಾಗುತ್ತದೆ ಎಂದು ದೇವಾಲಯದ ಮುಖ್ಯಸ್ಥ ಜಿ.ಭೀಮೇಶ್ವರ ಜೋಷಿ ತಿಳಿಸಿದರು.
ಕಳಸ ಸೇರಿದಂತೆ ಸುತ್ತಮುತ್ತಲಿನ ಭಾಗದ ಎಲ್ಲಾ ಕೃಷಿಕರು ದೇವಸ್ಥಾನಕ್ಕೆ ಬಂದು ಅನಪೂರ್ಣೇಶ್ವರಿ ದೇವಿಯ ದರ್ಶನ ಪಡೆದು ಶ್ರೀಮುಡಿ ಗಂಧಪ್ರಸಾದ ಸ್ವೀಕರಿಸಿ ತಮ್ಮ ಜಮೀನಿಗೆ ಸಿಂಪಡಿಸಬೇಕು. ಈ ಹಿಂದೆಯೂ ಜಗನ್ಮಾತೆಯ ಭಂಡಾರದ ಪ್ರಸಾದವನ್ನು ಕೃಷಿ ಭೂಮಿಗೆ ಹಾಕಿದ್ದರ ಪರಿಣಾಮ ಅನೇಕ ಸಮಸ್ಯೆಗಳು ಪರಿಹಾರ ಆಗಿರುವ ನಿದರ್ಶನಗಳೂ ಇದೆ ಎಂದರು.
ಮಹಾತಾಯಿ ಅನ್ನಪೂರ್ಣೆಯ ಅನುಗ್ರಹದಿಂದ ಕೃಷಿಕರಿಗೆ ಬಂದಿರುವ ಗಂಡಾಂತರ ಪರಿಹಾರ ಆಗುವ ಎಲ್ಲ ಭರವಸೆ ಇದೆ. ಈ ರೋಗದ ಬಗ್ಗೆ ವೈಜ್ಞಾನಿಕ ವಿಶ್ಲೇಷಣೆ ಮಾಡಬೇಕು ಮತ್ತು ನಿವಾರಣೆಯ ಮಾರ್ಗವನ್ನು ಕಂಡು ಹಿಡಿಯಬೇಕು ಎಂದು ಮುಖ್ಯಮಂತ್ರಿ, ಕೃಷಿ ಮಂತ್ರಿ ಮತ್ತು ಶಾಸಕರಲ್ಲಿ ಮನವಿ ಮಾಡಿದ್ದೇವೆ. ಈ ಕುರಿತು ಅಗತ್ಯವಾಗಿ ವಿಜ್ಞಾನಿಗಳು ಹಾಗೂ ಅಧಿಕಾರಿಗಳು ನಿಯಂತ್ರಣಾ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.
ಎಲ್ಲ ಕೃಷಿಕರೂ ಧೈರ್ಯದಿಂದ, ಸಾಮೂಹಿಕವಾಗಿ ಈ ರೋಗಕ್ಕೆ ಪರಿಹಾರ ಕಂಡು ಕೊಳ್ಳಬೇಕಾಗಿದೆ. ಕೃಷಿಕರು ಆತ್ಮಹತ್ಯೆಯಂತಹ ದುಡುಕಿನ ತೀರ್ಮಾನ ತೆಗೆದುಕೊಳ್ಳಬಾರದು ಎಂದೂ ಭೀಮೇಶ್ವರ ಜೋಷಿ ಮನವಿ ಮಾಡಿದ್ದಾರೆ.
ಕಳೆದ ಅನೇಕ ಸಮಯಗಳಿಂದ ಮಲೆನಾಡು ಭಾಗದ ರೈತರ ತೋಟಗಳಿಗೆ ಮಾರಕವಾದ ಎಲೆಚುಕ್ಕಿ ರೋಗ, ಹಳದಿ ಎಲೆ ರೋಗಗಳು ಬಾಧಿಸುತ್ತಿದ್ದು ಕೃಷಿಕರು ಆತಂಕಕ್ಕೆ ಸಿಲುಕಿದ್ದಾರೆ.









0 Comments